ಶರಾವತಿ ನದಿ ಪಾತ್ರದ ಜನರು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಗೊಳ್ಳುವಂತೆ ಸೂಚನೆ

ಶಿವಮೊಗ್ಗ : ಲಿಂಗನಮಕ್ಕಿ ಅಣೆಕಟ್ಟೆಯ ಕೆಳದಂಡೆಯಲ್ಲಿ ಹಾಗೂ ನದಿಯ ಪಾತ್ರದುದ್ದಕ್ಕೂ ವಾಸಿಸುತ್ತಿರುವ ಜನರೇ ಎಚ್ಚರ...ಲಿಂಗನಮಕ್ಕಿ ಜಲಾನಯನ ಪ್ರದೇಶದಲ್ಲಿ ಸತತವಾಗಿ ಭಾರಿ ಮಳೆಯಾಗ್ತಾಯಿದೆ. ಹೀಗಾಗಿ ಲಿಂಗಮಕ್ಕಿ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟವು ದಿನೇ ದಿನೇ ಏರುತ್ತಿದೆ.

ಜಲಾಶಯದ ಗರಿಷ್ಟ ಮಟ್ಟ ೧೮೧೯.೦೦ ಅಡಿಗಳಾಗಿದ್ದು ಈಗಾಗಲೇ ೧೮೦೧.೩೫ ಅಡಿಗಳಷ್ಟು ನೀರು ತಲುಪಿದೆ.ಇನ್ನೂ ಜಲಾಶಯಕ್ಕೆ ೩೦,೦೦೦ ಕ್ಯೂಸೆಕ್‌ಗಿಂತಲೂ ಹೆಚ್ಚು ನೀರು ಹರಿದುಬರುತ್ತಿದೆ. ಇದೇ ರೀತಿಯಲ್ಲಿ ಜಲಾಶಯಕ್ಕೆ ಬರುವ ನೀರಿನ ಹರಿವು ಮುಂದುವರೆದ ಪಕ್ಷದಲ್ಲಿ ಜಲಾಶಯವು ಶೀಘ್ರದಲ್ಲಿ ಗರಿಷ್ಟ ಮಟ್ಟವನ್ನು ತಲುಪುವ ಸಾಧ್ಯತೆ ಇರುತ್ತದೆ.

ಹೀಗಾಗಿ ಅಣೆಕಟ್ಟೆಯ ಸುರಕ್ಷತಾ ದೃಷ್ಟಿಯಿಂದ ಹೆಚ್ಚುವರಿ ನೀರನ್ನು ಜಲಾಶಯದಿಂದ ಯಾವುದೇ ಸಮಯದಲ್ಲಿ ಹೊರಬಿಡಲಾಗುವುದು. ಆದ್ದರಿಂದ ಅಣೆಕಟ್ಟೆಯ ಕೆಳದಂಡೆಯಲ್ಲಿ ಹಾಗೂ ನದಿಯ ಪಾತ್ರದುದ್ದಕ್ಕೂ ವಾಸಿಸುತ್ತಿರುವ ಸಾರ್ವಜನಿಕರು ತಮ್ಮ ಜನ, ಜಾನುವಾರುಳೊಂದಿಗೆ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಗೊಳ್ಳಬೇಕೆಂದು ಕರ್ನಾಟಕ ವಿದ್ಯುತ್ ನಿಗಮದ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.