ಶಿವಮೊಗ್ಗ : ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ್ದಾರೆ ಹಾಗೂ ವಿಧಾನಸಭೆಯಲ್ಲಿ ನಾಲಿಗೆ ಹರಿಬಿಟ್ಟಿದ್ದಾರೆ ಎಂದು ಆರೋಪಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಶಿವಮೊಗ್ಗ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು.
ಮುತ್ತಿಗೆ ಹಿನ್ನೆಲೆ ಬಿಜೆಪಿ ಕಚೇರಿ ಬಳಿ ಪೊಲೀಸರು ಬ್ಯಾರಿಕೇಡ್ ಹಾಕಿ ಬಂದೋಬಸ್ತ್ ಕೈಗೊಂಡಿದ್ದರು. ಯುವ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಕಚೇರಿ ಬಳಿ ತೆರಳುವುದನ್ನು ತಡೆದ ಪೊಲೀಸರು, ಕಾರ್ಯಕರ್ತರನ್ನು ಬಂಧಿಸಿದರು. ಕೆ.ಎಸ್.ಈಶ್ವರಪ್ಪ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ್ದಾರೆ. ವಿಧಾನಸಭೆ ಕಲಾಪದಲ್ಲಿ ನಾಲಿಗೆ ಹರಿಬಿಟ್ಟಿದ್ದಾರೆ. ಈಶ್ವರಪ್ಪ ಅವರನ್ನು ಸಚಿವ ಸ್ಥಾನದಿಂದ ಕೈಬಿಡಬೇಕು ಎಂದು ಯುವ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಹರಕು ನಾಲಿಗೆ ಈಶ್ವರಪ್ಪ ಎಂದು ಬ್ಯಾನರ್ ಹಿಡಿದು ಪ್ರತಿಭಟಿಸಿದರು. ಕಾಂಗ್ರೆಸ್ ಮುಖಂಡ ರಂಗನಾಥ್, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಗಿರೀಶ್, ಪ್ರಮುಖರಾದ ಪ್ರವೀಣ್, ಲೋಕೇಶ್, ನಿತಿನ್, ಕುಮರೇಶ್ ಸೇರಿದಂತೆ ಹಲವರನ್ನು ಪೊಲೀಸರು ಬಂಧಿಸಿದ್ದಾರೆ.